MGNREGA ಮರುನಾಮಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
“ಜನರ ರಕ್ಷಣೆಗೆ ಬೇಕೇ ಬೇಕು MGNREGA – ಬೇಡವೇ ಬೇಡ VB-G RAM-G”
ಉಡುಪಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯ ಹೆಸರನ್ನೂ ಅದರ ಮೂಲ ಸ್ವರೂಪವನ್ನೂ ಬದಲಾಯಿಸಿ “VB-G RAM-G” ಎಂದು ಮರುನಾಮಕರಣ ಮಾಡಿರುವುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಮಾಡಿದ ದೊಡ್ಡ ಅವಮಾನವಾಗಿದೆ ಎಂದು ಆರೋಪಿಸಿ, ಕಾಂಗ್ರೆಸ್ ಪಕ್ಷದಿಂದ ರಾಷ್ಟ್ರದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದಂತೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ವ್ಯಾಪ್ತಿಯ ಎಲ್ಲಾ ಬೂತ್ ಮಟ್ಟಗಳಲ್ಲಿ ಪ್ರತಿಭಟನೆ ಆಯೋಜಿಸಲಾಗಿದ್ದು, ಅದರ ಭಾಗವಾಗಿ ದಿನಾಂಕ 30-01-2026 ರಂದು ತೆಂಕನಿಡಿಯೂರು ಪಂಚಾಯತ್ ಎದುರು ಭಾರೀ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, “ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರಂಭದಿಂದಲೂ ಮಹಾತ್ಮ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳಿಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಕಾಂಗ್ರೆಸ್ ಸರ್ಕಾರ ಗಾಂಧೀಜಿ ಅವರ ನೆನಪಿಗಾಗಿ MGNREGA ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ ಬಿಜೆಪಿ ಸರ್ಕಾರ ಯೋಜನೆಯ ಹೆಸರನ್ನೇ ಬದಲಾಯಿಸುವ ಮೂಲಕ ಗಾಂಧೀಜಿ ಅವರಿಗೆ ಅಪಮಾನ ಮಾಡಿದೆ” ಎಂದು ವಾಗ್ದಾಳಿ ನಡೆಸಿದರು.
MGNREGA ಯೋಜನೆಯು ಗ್ರಾಮೀಣ ಬಡವರಿಗೆ ಉದ್ಯೋಗದ ಭದ್ರತೆ ನೀಡುವ ಮಹತ್ವದ ಯೋಜನೆಯಾಗಿದ್ದು, ಅದನ್ನು ಕೈಬಿಡುವ ಅಥವಾ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಉದ್ದೇಶ ಬಡವರ ಮೇಲಿನ ಅನ್ಯಾಯವಾಗಿದೆ. MGNREGA ಹೆಸರನ್ನು ಮರುಸ್ಥಾಪಿಸುವವರೆಗೆ ಕಾಂಗ್ರೆಸ್ ಪಕ್ಷದ ಹೋರಾಟ ನಿಲ್ಲದು ಎಂದು ಅವರು ಸ್ಪಷ್ಟಪಡಿಸಿದರು.
ಈ ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷೆ ಶೋಭಾ ಡಿ. ನಾಯ್ಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಮಿಕ ಸಂಘದ ಅಧ್ಯಕ್ಷ ಸೂರಜ್ ಕಲ್ಮಾಡಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರಾ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸತೀಶ್ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶರತ್ ಶೆಟ್ಟಿ ಸೇರಿದಂತೆ ಅನೇಕ ಮುಖಂಡರು, ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರತಿಭಟನಾಕಾರರು“ಜನರ ರಕ್ಷಣೆಗೆ ಬೇಕೇ ಬೇಕು MGNREGA” ಬೇಡವೇ ಬೇಡ ನಮಗೆ VB-G RAM-G”ಎನ್ನುವ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಉಡುಪಿ ರಾಜೇಶ್.






