ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಇಂದು (ಶುಕ್ರವಾರ) ಮುಂಜಾನೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಕೊಲೆಯಾದ ವ್ಯಕ್ತಿಯನ್ನು ತಲಪಾಡಿ ನಿವಾಸಿ, ರೌಡಿಶೀಟರ್ ಮುಳ್ಳುಗುಡ್ಡೆ ಹೌಸ್ನ ಆರಿಫ್ (46) ಎಂದು ಗುರುತಿಸಲಾಗಿದೆ. ಈತನನ್ನು ಸ್ಥಳೀಯವಾಗಿ ‘ಟಾಬ್ಲೆಟ್ ಆರಿಫ್’ ಎಂದೂ ಕರೆಯಲಾಗುತ್ತಿತ್ತು.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ತನ್ನ ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಆತನ ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬಿದ್ದ ತಕ್ಷಣವೇ ಕಾರಿನಿಂದ ಇಳಿದು ಬಂದ ತಂಡವು ಆತನ ಮೇಲೆ ಮಾರಕಾಸ್ತ್ರಗಳಿಂದ ಮನಸೋಇಚ್ಛೆ ದಾಳಿ ನಡೆಸಿ ಕೊಲೆ ಮಾಡಿದೆ.
ಕೃತ್ಯ ಎಸಗಿದ ನಂತರ ಆರೋಪಿಗಳು ಅದೇ ಕಾರಿನಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಂತಕರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಕೃತ್ಯಕ್ಕೆ ಕಾರಣ ಏನು? ಆರೋಪಿಗಳು ಯಾರು ಎನ್ನುವುದು ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ.





